ದೇವನಹಳ್ಳಿ : ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ಹಾಗೂ ಸ್ಪರ್ಧಾತ್ಮಕ ಮನೋಭಾವವನ್ನು ರೂಪಿಸುವ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಶಾಲೆಗಳಲ್ಲಿ ಹಮ್ಮಿಕೊಳ್ಳುವ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಲು ಒಂದು ಉತ್ತಮ ಕಾರ್ಯಕ್ರಮವಾಗಿದೆ, ಎಂದು ಬೆಟ್ಟಕೋಟೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುನಾಥ್ ತಿಳಿಸಿದ್ದಾರೆ.
ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಮನ್ವಯಾಧಿಕಾರಿಗಳ ಕಛೇರಿಯ ಸಂಯುಕ್ತ ಆಶ್ರಯದಲ್ಲಿ ರಾಯಸಂದ್ರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗುರುವಾರ ನಡೆದ ಕ್ಲಷ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.
ಪ್ರತಿಭಾ ಕಾರಂಜಿ ಕಾರ್ಯಕ್ರಮವು ವಿನೂತನವಾಗಿದ್ದು, ಶಾಲೆಯ ಕಲಿಕೆಯ ಜೊತೆಗೆ ಮಕ್ಕಳ ಆಟೋ-ಟಾ ಮತ್ತು ಅವರಲ್ಲಿರುವ ಕ್ರಿಯಾಶೀಲ ಪ್ರತಿಭೆಯನ್ನು ಹೊರತರಲು ಇಂತಹ ಪ್ರತಿಭಾ ಕಾರಂಜಿಯ ಕಾರ್ಯಕ್ರಮಗಳನ್ನು ನಡೆಸುವುದರಿಂದ ಮಕ್ಕಳಲ್ಲಿ ಜ್ಞಾಪಕ ಶಕ್ತಿ, ಸ್ವರ್ಧಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡಿದಂತಾಗುತ್ತದೆ. ಸಾಂಸ್ಕೃತಿಕವಾಗಿ ಸಾಹಿತ್ಯಿಕವಾಗಿ ಶೈಕ್ಷಣಿಕ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುಕೂಲವಾಗುತ್ತದೆ. ಈ ಭಾಗದಲ್ಲಿನ ಸರ್ಕಾರಿ ಶಾಲಾ ಮಕ್ಕಳ ಪ್ರತಿಭೆಗಳು ಬೆಳಕಿಗೆ ಬರುವ ನಿಟ್ಟಿನಲ್ಲಿ ಒಂದು ಉತ್ತಮವಾದ ಕಾರ್ಯಕ್ರಮ ಎಂದು ತಿಳಿಸಿದರು.
ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ನಾಗೇಶ್ ಅವರು ಮಾತನಾಡಿ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಶಾಲಾ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಲು ಇಂತಹ ಕಾರ್ಯಕ್ರಮ ಅಗತ್ಯವಾಗಿದೆ ಕ್ಲಸ್ಟರ್ ಮಟ್ಟದಲ್ಲಿ ವಿವಿಧ ಶಾಲೆಯ ಮಕ್ಕಳನ್ನು ಒಂದೆಡೆ ಸೇರಿಸಿ ನುರಿತ ಶಿಕ್ಷಕರೊಂದಿಗೆ ಮಕ್ಕಳ ಪ್ರತಿಭೆಯನ್ನು ಗುರುತಿಸುವುದರ ಜೊತೆಗೆ ಅವರಲ್ಲಿ ಆತ್ಮ ವಿಶ್ವಾಸದ ಬೆಳಕನ್ನು ಚೆಲ್ಲುವಂತ ಕೆಲಸ ಇಂತಹ ಕಾರ್ಯಕ್ರಮದಿಂದ ಆಗುತ್ತದೆ, ಎಂದರು.
ರಾಯಸಂದ್ರ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಸುಂದರ್ ಮಾತನಾಡಿ, ಚನ್ನಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಸುಮಾರು 80 ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದು ಇಲ್ಲಿನ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಮತ್ತು ಮಾಜಿ ಅಧ್ಯಕ್ಷ ಮಂಜುನಾಥ್ ಅವರುಗಳು ಕಾರ್ಯಕ್ರಮ ನಡೆಸಲು ಹೆಚ್ಚಿನ ಪ್ರೋತ್ಸಾಹ ನೀಡಿದ್ದಾರೆ ಒಂದು ವಾರಕ್ಕೂ ಮೊದಲೇ ಪೂರ್ವ ಸಿದ್ದತೆ ಸಭೆಗಳನ್ನು ನಡೆಸಿ ಪೆಂಡಾಲ್, ಬಹುಮಾನ ಪರಿಕರಗಳು, ಊಟದ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಕರ್ಯಗಳನ್ನು ಬಹಳ ಯಶಸ್ವಿಯಾಗಿ ಒದಗಿಸಿ ಕೊಟ್ಟಿದ್ದಾರೆ ಅವರೆಲ್ಲರ ಶ್ರಮಕ್ಕೆ ಶಾಲಾ ಆಡಳಿತ ಮಂಡಳಿ ಪರವಾಗಿ ಅಭಿನಂಧನೆ ಸಲ್ಲಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಬೆಟ್ಟಕೋಟೆ ಪಂಚಾಯಿತಿ ಅಧ್ಯಕ್ಷ ಲೋಕೇಶ್ ಗಾಂದಿ, ಉಪಾಧ್ಯಕ್ಷೆ ಅನೀತಾಪಿಳ್ಳರಾಜು, ಸದಸ್ಯರು ಮಂಜುನಾಥ, ಅರ್ಚನ, ರಾಯಸಂದ್ರದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರಾದ ಸುಂದರ್, ಸಹ ಶಿಕ್ಷಕರಾದ ಸೌಮ್ಯ, ಅಶ್ವಿನಿ, ಎಸ್ ಡಿಎಂಸಿ ಅಧ್ಯಕ್ಷ ವಾಸುದೇವ್, ಉಪಾಧ್ಯಕ್ಷ ರಾಧಮ್ಮ, ಗ್ರಾಮಸ್ಥರಾದ ತಿಮ್ಮರಾಜು, ಹರೀಶ್, ಮುನಿರಾಜು, ವೀರಭದ್ರ, ಶ್ರೀನಿವಾಸ್, ಮಧು, ಗಜೇಂದ್ರ, ನಟರಾಜು, ಹರ್ಷ ಮುಂತಾದವರು ಹಾಜರಿದ್ದರು.