ಬರ ಪರಿಸ್ಥಿಯ ನಿರ್ವಹಣೆಗೆ ಸಣ್ಣ ನೀರಾವರಿ ಇಲಾಖೆ ಸಜ್ಜು: ಬೋಸರಾಜು

0
12

ಬೆಂಗಳೂರು: ಬರ ಪರಿಸ್ಥಿತಿಯನ್ನು ಸಮಪರ್ಕವಾಗಿ ನಿಭಾಯಿಸುವ ನಿಟ್ಟಿನಲ್ಲಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೆ.ಸಿ ವ್ಯಾಲಿ ಮತ್ತು ಹೆಚ್.ಎನ್ ವ್ಯಾಲಿಯಂತಹ ಯೋಜನೆಗಳಿಂದ ರಾಜ್ಯದ ಬಯಲು ಸೀಮೆಯ 164 ತಾಲ್ಲೂಕುಗಳಲ್ಲಿ ಅಂತರ್ಜಲ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್ ಬೋಸರಾಜು ತಿಳಿಸಿದರು.

ವಿಕಾಸಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಪ್ರಕಟವಾಗಿರುವ ಕೇಂದ್ರ ಸರಕಾರದ 6ನೇ ನೀರಾವರಿ ಗಣತಿಯ ಕುರಿತು 2017-18 ರಲ್ಲಿ ಸಮೀಕ್ಷೆ ನಡೆಸಲಾಗಿದೆ. ಆ ವರ್ಷದಲ್ಲಿ ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದು, ಬರದ ಪರಿಸ್ಥಿತಿ ಇತ್ತು. ನಂತರದ ವರ್ಷಗಳಲ್ಲಿ ರಾಜ್ಯಾದ್ಯಂತ ಕೈಗೊಂಡಿರುವ ಕೆರೆಗಳನ್ನು ತುಂಬುವ ಏತ ನೀರಾವರಿಯ ಯೋಜನೆಗಳಿಂದಾಗಿ ಅಂತರ್ಜಲ ಮಟ್ಟದಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಅಂತರ್ಜಲ ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ 700 ಕೆರೆಗಳನ್ನು ನದಿಗಳಿಂದ, ಕಾಲುವೆಗಳಿಂದ ಹಾಗೂ ಬೆಂಗಳೂರು ನಗರದಲ್ಲಿ ಲಭ್ಯವಿರುವ ಎರಡನೇ ಹಂತದ ಸಂಸ್ಕರಿಸಿದ ನೀರನ್ನು ಬಳಸಿ ತುಂಬಿಸಲು ಕ್ರಮವಹಿಸಲಾಗಿದೆ.

ಬರ ಪರಿಸ್ಥಿತಿ ನಿರ್ವಹಣೆಗಾಗಿ ಇಲಾಖೆ ಸಜ್ಜು:
ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ 3673 ಕೆರೆಗಳಿವೆ. ಏತ ನೀರಾವರಿ ಯೋಜನೆಗಳ ಮೂಲಕ ಇವುಗಳನ್ನು ತುಂಬಿಸುವ ಕಾರ್ಯ ನಡೆಯುತ್ತದೆ. ಈ ಬಾರಿ ಕಡಿಮೆ ಮಳೆಯಾಗಿರುವ ಹಿನ್ನಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೆರೆಗಳಲ್ಲಿ ನೀರು ತುಂಬಿಲ್ಲ. ಅಂಕಿ ಅಂಶಗಳನ್ನು ಪರಿಗಣಿಸಿದಲ್ಲಿ ಶೇಕಡಾ 30 ಕ್ಕೂ ಕಡಿಮೆ ನೀರು ಶೇಖರಣೆ ಇರುವ ಕೆರೆಗಳ ಸಂಖ್ಯೆ 334. ಇದರ ಶೇಕಡಾವಾರು ಗಮನಿಸಿದಲ್ಲಿ ಇದು ಕೇವಲ 9%. ಆಗಸ್ಟ್ 24 ರಂದು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳ ವಿಸ್ತ್ರತ ಸಭೆಯನ್ನು ನಡೆಸಿ ವಸ್ತುಸ್ಥಿತಿಯ ಮಾಹಿತಿಯನ್ನು ಪಡೆದುಕೊಂಡಿದ್ದೇನೆ.

ಕೆರೆಗಳಲ್ಲಿ ನೀರನ್ನು ಸಂಗ್ರಹಿಸಿ ಇಟ್ಟುಕೊಂಡು ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಣ್ಣ ನೀರಾವರಿ ಮತ್ತು ಗ್ರಾಮೀಣಾಭಿವೃದ್ದಿ ಇಲಾಖೆಯ ವ್ಯಾಪ್ತಿಯಲ್ಲಿನ ಕೆರೆಗಳ ತೂಬುಗಳಿಂದ ಕೃಷಿ ಚಟುವಟಿಕೆಗಳಿಗೆ ನೀರನ್ನ ಹರಿಸುವ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ನಿರ್ಭಂದಿಸಲಾಗಿದೆ. ಇದೇ ಸಮಯದಲ್ಲಿ ಕುಡಿಯುವ ನೀರಿನ ಅವಶ್ಯಕತೆಗೆ ಹೆಚ್ಚಿನ ಒತ್ತು ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ಸಚಿವರು ತಿಳಿಸಿದರು.

ಪಿಎಂಕೆಎಸ್ವೈ ಮತ್ತು ಅಟಲ್ ಭೂಜಲ ಯೋಜನೆಯ ಅಡಿಯಲ್ಲಿ ಕೇಂದ್ರ ಸರಕಾರಕ್ಕೆ ಅಗತ್ಯ ಪ್ರಸ್ತಾವನೆಗಳನ್ನು ಸಲ್ಲಿಸಲಾಗಿದೆ. ಪಿಎಂಕೆಎಸ್ವೈ ಯೋಜನೆಯ ಅಡಿಯಲ್ಲಿ ಕೇಂದ್ರ ಸರಕಾರ ಶೇಕಡಾ 60 ರಷ್ಟು ರಾಜ್ಯ ಸರಕಾರ ಶೇಕಡಾ 40 ರಷ್ಟು ಅನುದಾನ ನೀಡುವ ಯೋಜನೆಯ ಅಡಿಯಲ್ಲಿ ಕೇಂದ್ರ ಸರಕಾರ 439 ಕೋಟಿ ರೂಪಾಯಿಗಳ 138 ಕಾಮಗಾರಿಗಳಿಗೆ ಒಪ್ಪಿಗೆ ನೀಡಿದ್ದು, ಇನ್ನೂ 1892 ಕೋಟಿ ರೂಪಾಯಿಗಳ ವೆಚ್ಚದ 851 ಕಾಮಗಾರಿಗಳ ಪ್ರಸ್ತಾವನೆಗೆ ಒಪ್ಪಿಗೆ ನೀಡುವ ಕಾರ್ಯ ಇನ್ನೂ ಬಾಕಿಯಿದೆ ಎಂದು ಹೇಳಿದರು.

– ಏತ ನೀರಾವರಿ ಯೋಜನೆಗಳಿಂದ ರಾಜ್ಯದ 164 ತಾಲ್ಲೂಕುಗಳಲ್ಲಿ ಅಂತರ್ಜಲ ಮಟ್ಟ ಏರಿಕೆ
– ಬರದ ಪರಿಸ್ಥಿತಿಯಲ್ಲಿ ಕೈಗೊಂಡಿದ್ದ ನೀರಾವರಿ ಗಣತಿಯಲ್ಲಿ ಹೆಚ್ಚಿನ ಸಾಧನೆ ಗೋಚರವಾಗಿಲ್ಲ
– ಮಲೆನಾಡಿಗೆ ಹೋಲಿಸಿದಲ್ಲಿ – ಬಯಲು ಸೀಮೆಯ ತಾಲ್ಲೂಕುಗಳಲ್ಲಿ ಅಂತರ್ಜಲ ಹೆಚ್ಚಳ