ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರ ಸ್ಪಂದಿಸಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ

Kalabandhu Editor
2 Min Read

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಜಿಲ್ಲೆಯ ನಾಲ್ಕು ತಾಲ್ಲೂಕುಗಳ ಯಾವುದೇ ಗ್ರಾಮೀಣ ಪ್ರದೇಶದಲ್ಲಿ ಅಥವಾ ನಗರ ಪ್ರದೇಶಗಳಲ್ಲಿ ಕುಡಿಯುವ ನೀರು ಸಮಸ್ಯೆ ಕಂಡುಬಂದಲ್ಲಿ ಶೀಘ್ರ ಸ್ಪಂದಿಸಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮೇಲ್ವಿಚಾರಣೆಯಲ್ಲಿ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಒದಗಿಸುವ ಸಂಬಂಧ ಪರಿಶೀಲನಾ ಸಭೆ ಜಿಲ್ಲಾಧಿಕಾರಿ ಡಾ ಶಿವಶಂಕರ್ ಎನ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಸೋಮವಾರ ನಡೆಯಿತು.
ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಪರ್ಯಾಯವಾಗಿ ನೀರು ಪೂರೈಸಲು ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸಲು ಮೊದಲ ಆದ್ಯತೆ ನೀಡಿ. ಅವಶ್ಯವಿದ್ದಲ್ಲಿ ಖಾಸಗಿ ಟ್ಯಾಂಕರ್ ಗಳ ಮೂಲಕ ನೀರನ್ನು ಪೂರೈಸಲು ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಪರಿಸ್ಥಿತಿ ನೋಡುವುದಾದರೆ ನೆಲಮಂಗಲದ ನಗರ ವ್ಯಾಪ್ತಿಯಲ್ಲಿ ಕೆಲವು ಭಾಗ ಹಾಗೂ ದೇವನಹಳ್ಳಿ ತಾಲ್ಲೂಕಿನ ವೆಂಕಟಗಿರಿ ಕೋಟೆ ಪಂಚಾಯಿತಿ ವ್ಯಾಪ್ತಿಯಲ್ಲಿ, ಚನ್ನರಾಯಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ಬೂದಿಗೆರೆಯ ಇಂದ್ರಹಳ್ಳಿ ಗ್ರಾಮಗಳಲ್ಲಿ ಸ್ವಲ್ಪ ಪ್ರಮಾಣದ ಸಮಸ್ಯೆ ಕಂಡು ಬಂದಿದ್ದು ಈಗಾಗಲೇ ಟ್ಯಾಂಕರ್ ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಬರಗಾಲದಿಂದ ಕೊಳವೆಬಾವಿಗಳಲ್ಲಿ 10 ಅಡಿಯಷ್ಟು ನೀರು ಇಳಿಕೆಯಾಗಿದೆ. ಯಾವುದೇ ನಗರ ಗ್ರಾಮೀಣ ಪ್ರದೇಶದಲ್ಲಿ ಸಮಸ್ಯೆ ಕಂಡುಬಂದಲ್ಲಿ ತ್ವರಿತವಾಗಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಜಾನುವಾರುಗಳಿಗೆ ಮೇವಿನ ಸಮಸ್ಯೆ ಇದುವರೆಗೂ ಕಂಡುಬಂದಿಲ್ಲ, ಗೋಶಾಲೆಗಳಲ್ಲಿ ಹೆಚ್ಚಿನ ಮೇವು ಸಂಗ್ರಹಿಸಿಡಿಲು ಅಧಿಕಾರಿಗಳಿಗೆ ಸೂಚಿಸಿದರು. ಕಡ್ಡಾಯವಾಗಿ ಗ್ರಾ.ಪಂ ವ್ಯಾಪ್ತಿಯಲ್ಲಿನ ಜಾನುವಾರುಗಳ ಕುಡಿಯುವ ನೀರಿನ ತೊಟ್ಟಿಗಳನ್ನು ನಿತ್ಯವೂ ಸ್ವಚ್ಛಗೊಳಿಸಿ, ನೀರಿನ ವ್ಯವಸ್ಥೆಯನ್ನು ಒದಗಿಸುವ ಕೆಲಸ ಮಾಡಬೇಕು. ಬರ ಪರಿಸ್ಥಿತಿಯನ್ನು ಸಮಗ್ರವಾಗಿ ನಿರ್ವಹಿಸಲು ತಾಲ್ಲೂಕುವಾರು ಒಬ್ಬ ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ ವಾರಕ್ಕೊಮ್ಮೆ ತಾಲ್ಲೂಕುಗಳಿಗೆ ಭೇಟಿ ನೀಡಿ ವರದಿ ನೀಡಬೇಕು ಎಂದು ಹೇಳಿದರು.

ಬಿಸಿಗಾಳಿಯಿಂದ ರಕ್ಷಣೆ ಪಡೆಯಿರಿ:- ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬಿಸಿಗಾಳಿ ಆತಂಕವಿದ್ದು, ಬಿಸಿಲಿನಿಂದ ರಕ್ಷಣೆ ಪಡೆಯುವುದು ಮುಖ್ಯ. ಜನರು ಬಿಸಿಲಿನ ಸಮಯದಲ್ಲಿ ಮನೆಗಳಿಂದ ಅತೀ ಅವಶ್ಯವಿದ್ದಾಗ ಮಾತ್ರ ಹೊರ ಬನ್ನಿ, ಅನಗತ್ಯ ಬಿಸಿಲಿನಲ್ಲಿ ಓಡಾಡುವುದು ನಿಲ್ಲಿಸಬೇಕು. ಮನೆಯಿಂದ ಹೊರಗಡೆ ಓಡಾಡುವ ವೇಳೆ ತಲೆ ಭಾಗಕ್ಕೆ ಟೋಪಿ ಇಲ್ಲವೇ ಬಟ್ಟೆಯನ್ನು ಬಳಸಿಕೊಂಡು ಬಿಸಿಗಾಳಿಯಿಂದ ರಕ್ಷಣೆ ಪಡೆಯಿರಿ.

ಗುಡುಗು ಸಿಡಿಲಿನ ಅಪಾಯದಿಂದ ರಕ್ಷಣೆ:- ಗುಡುಗು ಸಿಡಿಲಿನ ವೇಳೆಯಲ್ಲಿ ಜನರು ಹಾಗೂ ಜಾನುವಾರು ಸಂರಕ್ಷಿಸಿಕೊಳ್ಳಲು ಹೊಲ-ಗದ್ದೆಗಳಲ್ಲಿ ರೈತರು ಕೆಲಸ ಮಾಡುವಾಗ ಗಿಡ-ಮರಗಳ ಆಶ್ರಯ ಪಡೆಯುವುದನ್ನು ಮಾಡಬಾರದು. ಅಕಾಲಿಕ ಮಳೆ ಸಂದರ್ಭ ಕಂಡುಬಂದಲ್ಲಿ ಮನೆಗಳಿಗೆ ತೆರಳಿ. ಬಿಸಿಗಾಳಿ, ಗುಡುಗು ಸಿಡಿಲು ಬಗ್ಗೆ ಮುನ್ನೆಚ್ಚರಿಕೆ ಪಾಲಿಸಲು ಸ್ಥಳೀಯವಾಗಿ ಜನರಲ್ಲಿ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಡಾ.ಅನುರಾಧ ಕೆ.ಎನ್, ಅಪರ ಜಿಲ್ಲಾಧಿಕಾರಿ ಸಂಗಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Share this Article